ಉಡುಪಿ ಜಿಲ್ಲೆಯಲ್ಲಿನ ಭೂಕುಸಿತ ಪ್ರದೇಶಗಳ ಬಗ್ಗೆ ಪರಿಶೀಲನೆ ನಡೆಸಿ, ಭೂಕುಸಿತ ತಡೆಗಟ್ಟುವ ಬಗ್ಗೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವ ಕುರಿತು ಈಗಾಗಲೇ ಬೆಂಗಳೂರಿನ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಕಚೇರಿಯ ತಾಂತ್ರಿಕ ಸಿಬ್ಬಂದಿಗಳು ಸರ್ವೇ ಮಾಡಿ, ವರದಿಯೊಂದಿಗೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಇವುಗಳ ತಡೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಹೇಳಿದರು
ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಉಡುಪಿ ಜಿಲ್ಲೆ ಇವರ ವತಿಯಿಂದ ಇಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆ 69 ನೇ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಅವರು ಕರ್ನಾಟಕ ರಾಜ್ಯೋತ್ಸವದ ಸಂದೇಶ ನೀಡಿದರು.
ನಮ್ಮ ಯುವ ಪೀಳಿಗೆಗೆ ಸಾಹಿತ್ಯ, ಪರಿಸರ, ಜನಪದ ಕಲೆಗಳನ್ನು ಉಳಿಸಲು ಹಾಗೂ ಸಂಸ್ಕೃತಿಯ ಪರಿಚಯ ಮಾಡಿಸಲು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಅಧಿನಿಯಮವನ್ನು ತಿದ್ದುಪಡಿ ಮಾಡುವ ಮೂಲಕ ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಹಾಗೂ ಹೋಟೆಲ್ಗಳು ಮುಂತಾದವುಗಳು ತಮ್ಮ ನಾಮಫಲಕಗಳಲ್ಲಿ ಕನ್ನಡ ಭಾಷೆಯಲ್ಲಿ ಕನಿಷ್ಠ ಶೇಕಡ 60 ರಷ್ಟು ಪ್ರದರ್ಶಿಸಬೇಕು ಹಾಗೂ ಕನ್ನಡ ಭಾಷೆಯು ನಾಮ ಫಲಕದ ಮೇಲ್ಭಾಗದಲ್ಲಿ ಪ್ರದರ್ಶಿತವಾಗಿದೆ ಎಂದು ಸ್ಥಳೀಯ ಸಂಸ್ಥೆಗಳು ಖಚಿತ ಪಡಿಸಿಕೊಳ್ಳತಕ್ಕದ್ದು ಎಂದು ಸೂಚಿಸಲಾಗಿದೆ.
ರಾಜ್ಯ ಸರಕಾರಿ ನೌಕರರು ಕಡ್ಡಾಯವಾಗಿ ತಮ್ಮ ಗುರುತಿನ ಚೀಟಿಗೆ ಕನ್ನಡ ಧ್ವಜದ ಬಣ್ಣವಾದ ಹಳದಿ – ಕೆಂಪು ಬಣ್ಣದ ಕೊರಳು ದಾರ ಹಾಕುವಂತೆ ಆದೇಶ ಹೊರಡಿಸಲಗಿದೆ. ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡುವುದರಲ್ಲಿ ನಮ್ಮ ಸರಕಾರ ಹಿಂದೆ ಬಿದ್ದಿಲ್ಲ.
ಸಮೃದ್ಧ ಕರ್ನಾಟಕ ನಿರ್ಮಾಣ ಮಾಡುವುದೇ ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಸರ್ವರಿಗೂ ಸಾಮಾಜಿಕ ಹಾಗೂ ಆರ್ಥಿಕ ಸ್ವಾತಂತ್ರ್ಯ ನೀಡಲು ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಈ ಮೂಲಕ ಜನರ ರಾಜಕೀಯ,ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯಕ್ಕೆಯಾವುದೇ ರೀತಿಯ ಧಕ್ಕೆ ಆಗದಂತೆ ನೋಡಿಕೊಳ್ಳುವುದು ನಮ್ಮ ಸರ್ಕಾರದ ಕಳಕಳಿಯಾಗಿದೆ. ಕರ್ನಾಟಕ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕ ಪ್ರಗತಿಗೆ ಬಲತುಂಬಿವೆ ಎಂಬ ಸಂಗತಿ ಇತ್ತೀಚೆಗೆ ಕೇಂದ್ರ ಸರ್ಕಾರದ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಇಲಾಖೆ ಬಿಡುಗಡೆ ಮಾಡಿರುವ ಆರ್ಥಿಕ ಪ್ರಗತಿ ವರದಿಯಲ್ಲಿ ಕರ್ನಾಟಕ ರಾಜ್ಯದ ಜಿ.ಡಿ.ಪಿ ದರ ಶೇಕಡ 10.2 ರಷ್ಟು ದಾಖಲಾಗಿದೆ. ಇದು ದೇಶದ ಒಟ್ಟಾರೆ ಜಿ.ಡಿ.ಪಿ ದರಕ್ಕಿಂತ ಹೆಚ್ಚು.ಕರ್ನಾಟಕದ ಈ ಆರ್ಥಿಕ ಪ್ರಗತಿಗೆ ನಮ್ಮ ಸರ್ಕಾರದ ಗ್ಯಾರಂಟಿಗಳ ಕೊಡುಗೆ ಗಣನೀಯವಾಗಿದೆ.
ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ದಿವಾಳಿ ಆಗಲಿದೆ ಎಂದು ನಿರೀಕ್ಷೆ ಮಾಡಿದವರಿಗೆ ಈಗ ಭ್ರಮನಿರಸನವಾಗಿದೆ. ಇವುಗಳ ನಡುವೆಯೂ ನಾವು ಆರ್ಥಿಕ ಬೆಳವಣಿಗೆ ಸಾಧಿಸಿ ತೋರಿಸಿ ಅವರಿಗೆ ಉತ್ತರ ನೀಡಿದ್ದೇವೆ. ಈ ಐದು ಯೋಜನೆಗಳ ಫಲವಾಗಿ ಪ್ರತಿಯೊಬ್ಬ ಫಲಾನುಭವಿಗಳ ಕುಟುಂಬಕ್ಕೆ ಸರಾಸರಿ ತಿಂಗಳಿಗೆ 4000 ದಿಂದ 5000 ರೂ.ಗಳ ತನಕ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಆರ್ಥಿಕ ನೆರವು ಲಭಿಸಿದೆ. ಇಂತಹದೊಂದು ಯೋಜನೆಯನ್ನು ಪಡೆದ ರಾಜ್ಯದ ಜನರು ಸಂತೃಪ್ತರಾಗಿದ್ದಾರೆ.
ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿ, ಒಂದು ವರ್ಷ ಪೂರ್ಣಗೊಂಡಿದ್ದು, ಈವರೆಗೆ ರಾಜ್ಯದಲ್ಲಿ 1 ಕೋಟಿ 23 ಲಕ್ಷ ಕುಟುಂಬಗಳ ಯಜಮಾನಿಯರಿಗೆ ಪ್ರತೀ ತಿಂಗಳು 2000 ರೂ. ಗಳಂತೆ ತಿಂಗಳಿಗೆ 2,280 ಕೋಟಿ ರೂ.ಗಳ ಹಣ ವರ್ಗಾವಣೆ ಮಾಡುವ ಮೂಲಕ ಒಂದು ವರ್ಷದಲ್ಲಿ ಒಟ್ಟು 25,248 ಕೋಟಿ ರೂ. ವರ್ಗಾಯಿಸಲಾಗಿದೆ. ಈ ಯೋಜನೆಯ ಹಣ ಕುಟುಂಬದ ಯಜಮಾನಿಗೆ ನಾನಾ ರೀತಿಯಲ್ಲಿ ನೆರವಿಗೆ ಬಂದಿದೆ. ಮುಂದೆಯೂ ಈ ಯೋಜನೆಯಿಂದ ಜನರಿಗೆ ಮತ್ತಷ್ಟು ಅನುಕೂಲವಾಗಲಿ ಎಂಬುದೇ ನಮ್ಮ ಆಶಯವಾಗಿದೆ. ಜಿಲ್ಲೆಯಲ್ಲಿ ಈ ಯೋಜನೆಯಡಿ 2,23,084 ಮಹಿಳಾ ಫಲಾನುಭವಿಗಳ ಖಾತೆಗೆ ತಲಾ 2000 ರೂ.ಗಳಂತೆ ಪಾವತಿಸಿ, ಶೇಕಡ. 96.25 ಪ್ರಗತಿ ಸಾಧಿಸಲಾಗಿದೆ.ಇತರ ಗ್ಯಾರಂಟಿ ಯೋಜನೆಗಳಿಂದ ಕೂಡ ಜಿಲ್ಲೆಯ ಜನರಿಗೆ ಸಾಕಷ್ಟು ಪ್ರಯೋಜನವಾಗುತ್ತಿದೆ.
ರಾಜ್ಯವನ್ನು ಬಂಡವಾಳ ಹೂಡಿಕೆಯ ಪ್ರಶಸ್ತ ತಾಣವಾಗಿಸಿದ ನಮ್ಮ ಸರ್ಕಾರದ ಪ್ರಯತ್ನಗಳು ಹಾಗೂ ಯುವ ಜನರಿಗೆ ಕೈಗಾರಿಕೆಗಳು ಮತ್ತು ಉದ್ದಿಮೆಗಳಲ್ಲಿ ಬೇಡಿಕೆಯಿರುವ ಕೌಶಲ್ಯಾಧಾರಿತ ತರಬೇತಿ ನೀಡುತ್ತಿರುವುದರ ಪರಿಣಾಮ ಉದ್ಯೋಗಾವಕಾಶ ಮತ್ತು ವೇತನ ವೃದ್ಧಿಯಲ್ಲಿ ಬೆಂಗಳೂರು ದೇಶದಲ್ಲಿಯೇ ನಂ.1 ಸ್ಥಾನಕ್ಕೇರಿದೆ. ಕರ್ನಾಟಕ ಪ್ರವಾಸೋದ್ಯಮ ನೀತಿ 2024-29 ಕ್ಕೆ ಅನುಮೋದನೆ ನೀಡಲಾಗಿದ್ದು, ಇದರಿಂದ ಕರ್ನಾಟಕ ಪ್ರವಾಸೋದ್ಯಮವನ್ನು ವೈವಿಧ್ಯಮಯ ಹಾಗೂ ಶ್ರೇಷ್ಠ ಗುಣಮಟ್ಟದ ಪ್ರವಾಸೋದ್ಯಮ ಉತ್ಪನ್ನಗಳು ಹಾಗೂ ಸೇವೆಯ ಮೂಲಕ ಪ್ರವಾಸಿಗರಿಗೆ ವಿಶ್ವ ದರ್ಜೆಯ ಅನುಭವವನ್ನು ಒದಗಿಸಿ, ಕರ್ನಾಟಕವನ್ನು ಜಾಗತಿಕವಾಗಿ ಹಾಗೂ ದೇಶದ ಆಕರ್ಷಣೀಯ ಪ್ರವಾಸಿ ತಾಣವನ್ನು ಉತ್ತೇಜಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಇದಕ್ಕಾಗಿ 1,349 ಕೋಟಿ ರೂ. ಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.
ರಾಜ್ಯದ ಸರ್ಕಾರಿ ಶಾಲೆಗಳ 4 ಮತ್ತು 5 ನೇ ತರಗತಿ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ಕಲಿಕಾ ಸಾಮಗ್ರಿಗಳನ್ನು ವಿನ್ಯಾಸಗೊಳಿಸಿ, ಮುದ್ರಿಸಿ, ವಿತರಿಸಲು ಹಾಗೂ ಶಿಕ್ಷಕರಿಗೆ ಅಗತ್ಯ ತರಬೇತಿ ನೀಡಲು 14.2 ಕೋಟಿ ರೂ. ವೆಚ್ಚದ ಓದು ಕರ್ನಾಟಕ ಚಟುವಟಿಕೆಗೆ ಅನುಮೋದನೆ ನೀಡಲಾಗಿದೆ. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನರಿಗೆ ಪಸರಿಸುವ ಮಹತ್ವದ ಉದ್ದೇಶದೊಂದಿಗೆ ರಾಜ್ಯದಲ್ಲಿ ಬೀದನಿರ್ಂದ ಚಾಮರಾಜನಗರದವರೆಗೆ 2,500 ಕಿ.ಮೀ ವರೆಗೆ ಜನರು ಪರಸ್ಪರ ಕೈ ಹಿಡಿದು ಮಾನವ ಸರಪಳಿ ರಚಿಸಿರುವುದು ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಗೆ ಸೇರಿದೆ. ಉಡುಪಿ ಜಿಲ್ಲೆಯ ಕುತ್ಪಾಡಿಯ ಎಸ್ .ಡಿ ಎಮ್. ಆಯುರ್ವೇದ ಕಾಲೇಜ್, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಸಂಸ್ಥೆಯು ನ್ಯಾಶನಲ್ ಕಮಿಶನ್ ಫಾರ್ ಇಂಡಿಯನ್ ಸಿಸ್ಟಮ್ ಅಪ್ ಮೆಡಿಸಿನ್,ಭಾರತೀಯ ವೈದ್ಯ ಪದ್ಧತಿಯ ಸಂಸ್ಥೆಗಳ ವೈದ್ಯಕೀಯ ಮೌಲ್ಯಮಾಪನ ಸಂಸ್ಥೆ ನವ ದೆಹಲಿ ಹಾಗೂ ರಾಷ್ಟ್ರೀಯ ಗುಣಮಟ್ಟ ನಿಯಂತ್ರಣ ಸಂಸ್ಥೆಯ ನಡೆಸಿದ ಮೌಲ್ಯಮಾಪನದಲ್ಲಿ ಅಖಿಲ ಭಾರತ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದೆ.
ಪ್ರಸಕ್ತ ಸಾಲಿನಲ್ಲಿ ಪಶ್ಚಿಮ ವಾಹಿನಿ ಯೋಜನೆಯಡಿ 1 ಕೋಟಿ 88 ಲಕ್ಷ ರೂ.ಗಳ ಮೊತ್ತದಲ್ಲಿ ಕಿಂಡಿ ಆಣೆಕಟ್ಟು ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಇದರಿಂದ 33 ಹೆಕ್ಟೇರ್ ಕೃಷಿ ಭೂಮಿಗಳಿಗೆ ನೀರಾವರಿ ಸೌಲಭ್ಯ ಒದಗಲಿದೆ. ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳ ಸಂರಕ್ಷಣೆಗಾಗಿ ಸುಮಾರು 6 ಕೋಟಿ 15 ಲಕ್ಷ ರೂ. ಮೊತ್ತದಲ್ಲಿ 151 ಕಿ.ಮೀ ಉದ್ದದ ನದಿ ದಂಡೆ ಸಂರಕ್ಷಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಪ್ರಸಕ್ತ ಸಾಲಿನ ಮುಂಗಾರು ಮಳೆಯು 4,486 ಮಿ.ಮೀ ದಾಖಲಾಗಿ ವಾಡಿಕೆ ಮಳೆಗಿಂತ ಶೇ. 12 ರಷ್ಟು ಹೆಚ್ಚುವರಿ ಮಳೆಯಾಗಿದೆ. ಈ ಮಳೆಯಿಂದಾಗಿ ಮಾನವ ಜೀವಹಾನಿ, 1,288 ವಾಸ್ತವ್ಯ ಮನೆಹಾನಿ, 665.10 ಹೆಕ್ಟೇರ್ ಕೃಷಿ ಹಾಗೂ 200.48 ಹೆಕ್ಟೇರ್ನಷ್ಟು ತೋಟಗಾರಿಕೆ ಬೆಳೆಗಳ ಹಾನಿಯಾಗಿದೆ. ಪ್ರಕೃತಿ ವಿಕೋಪದಿಂದ ಹಾನಿ ಸಂಭವಿಸಿರುವ ಹಿನ್ನೆಲೆಯಲ್ಲಿ, ಮಾರ್ಗಸೂಚಿಯನ್ವಯ ಹಾನಿಗೆ ಸಂಬಂಧಿಸಿದ ಪ್ರಕರಣಗಳಿಗೆ ಇದುವರೆಗೆ 3 ಕೋಟಿ 09 ಲಕ್ಷ ರೂ. ಪರಿಹಾರವನ್ನು ಪಾವತಿಸಲಾಗಿದೆ.
ಜಿಲ್ಲೆಯ ನಾಗರಿಕರಿಂದ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸಲು ಪ್ರತೀ ತಿಂಗಳು ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆ ಹಾಗೂ ತಾಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಒಟ್ಟು 1,089 ಅರ್ಜಿಗಳು ಸ್ವೀಕೃತವಾಗಿದ್ದು, ಎಲ್ಲಾ ಅರ್ಜಿಗಳನ್ನು ವಿಲೇವಾರಿಗೊಳಿಸಲಾಗಿದೆ. ನಾಡಿನಲ್ಲಿ ಕನ್ನಡವನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಲು ಸರ್ವತೋಮುಖವಾಗಿ ಬೆಳೆಸಲು ನಮ್ಮ ಸರ್ಕಾರಕ್ಕೆ ಸಂಪೂರ್ಣ ಬದ್ಧತೆ ಇದೆ. ಇದಕ್ಕೆ ನಮ್ಮ ಕನ್ನಡದ ಜನರೂ ಪೂರ್ಣ ಸಹಕಾರ ನೀಡಬೇಕು. ಕನ್ನಡ ನಾಡಿನಲ್ಲಿ ಕನ್ನಡದ ಮನಸ್ಸುಗಳು ನಿರ್ಮಾಣವಾಗಬೇಕು. ಕನ್ನಡ ಪುಸ್ತಕಗಳನ್ನು ಹೆಚ್ಚು ಹೆಚ್ಚಾಗಿ ಓದುವ, ಕನ್ನಡ ಸಂಸ್ಕೃತಿಯನ್ನು ಅಭಿಮಾನಿಸಿ, ಪ್ರೀತಿಸುವ ಮನೋಭಾವ ನಮ್ಮ ಜನರಲ್ಲಿ ಬರಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಎ ಸುವರ್ಣ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.